Karnataka Varthe
37.1K subscribers
Verified ChannelAbout Karnataka Varthe
Official channel of Department of Information and Public Relations, Government of Karnataka
Similar Channels
Swipe to see more
Posts
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವ ಹಿನ್ನೆಲೆ, ವೀಕ್ಷಕರ ಅನುಕೂಲಕ್ಕಾಗಿ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲು ಬಿಎಂಆರ್ಸಿಎಲ್ ನಿರ್ಧರಿಸಿದೆ. ಫೆಬ್ರವರಿ 22, 24, 25, 26, 27, 28 ಮತ್ತು ಮಾರ್ಚ್ 1 ರಂದು ಪಂದ್ಯಗಳು ನಡೆಯಲಿದ್ದು, ಅಂದು ರಾತ್ರಿ 11.20ಕ್ಕೆ ಮೆಟ್ರೋ ನೇರಳೆ ಮಾರ್ಗ ಮತ್ತು ಹಸಿರು ಮಾರ್ಗಗಳ ನಾಲ್ಕು ಟರ್ಮಿನಲ್ಗಳಿಂದ ಕೊನೆಯ ಮೆಟ್ರೋ ರೈಲುಗಳು ಹೊರಡಲಿವೆ. ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಲ್ಕು ಟರ್ಮಿನಲ್ಗಳ ಕಡೆಗೆ ರಾತ್ರಿ 11.55ಕ್ಕೆ ರೈಲುಗಳು ಹೊರಡಲಿವೆ. #NammaMetro #WPL

ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ. ಮತ್ತೊಂದೆಡೆ ಅನೇಕ ಗೃಹಿಣಿಯರು ತಮಗೆ ಬಂದ ಗೃಹಲಕ್ಷ್ಮಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಗಮನಾರ್ಹ ಸಂಗತಿ. ಶ್ರೀರಂಗಪಟ್ಟಣದ ಬಾಬುರಾಮನಕೊಪ್ಪಲು ಗ್ರಾಮದ ಮಹಿಳೆ ವಿಜಯಲಕ್ಷ್ಮಿ ರಂಗನಾಥ್ ಎಂಬವರು ಗೃಹಲಕ್ಷ್ಮಿ ಯೋಜನೆಯಿಂದ ತಮಗೆ ಬಂದಿರುವ ₹30 ಸಾವಿರ ಹಾಗೂ ಸ್ವಂತ ಹಣ ₹20 ಸಾವಿರ ಸೇರಿಸಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಸಿದ್ದಾರೆ. ಈ ಮೂಲಕ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪ್ರೋತ್ಸಾಹ ನೀಡಿದ್ದಾರೆ. #Gruhalakshmi

ವಿಧಾನಸಭೆ ಸಚಿವಾಲಯದ ವತಿಯಿಂದ ವಿಧಾನಸೌಧದ ಆವರಣದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಆಯೋಜಿಸಲಾಗಿರುವ ಪುಸ್ತಕ ಮೇಳದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಅನುದಾನದಲ್ಲಿ ₹2 ಲಕ್ಷ ಮಿತಿಯೊಳಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. #ಪುಸ್ತಕಮೇಳ

ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ನಮ್ಮ ಸರಸ್ ಮೇಳ 2025 ಅನ್ನು ಆಯೋಜಿಸಲಾಗಿದೆ. ಫೆಬ್ರವರಿ 24 ರಿಂದ ಮಾರ್ಚ್ 5ರ ವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ 18 ರಾಜ್ಯಗಳ 230 ಮಹಿಳಾ ಸ್ವ ಸಹಾಯ ಸಂಘಗಳ 2,000 ಕ್ಕೂ ಹೆಚ್ಚು ಮಹಿಳೆಯರು ಭಾಗಿಯಾಗಲಿದ್ದಾರೆ. #ಸರಸ್ಮೇಳ

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಕಾಲ್ಗುಡಿ ಗ್ರಾಮದಲ್ಲಿ ನೀರಿನ ಟ್ಯಾಂಕ್ ದುರಸ್ತಿಯಾಗದಿರುವುದಾಗಿ ʼಎಕ್ಸ್ʼ ಬಳಕೆದಾರರೊಬ್ಬರು ದೂರು ನೀಡಿರುತ್ತಾರೆ. ಈ ದೂರನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಗ್ರಾಮ ಪಂಚಾಯಿತಿಯಿಂದ ಪ್ರತಿ 15 ದಿನಗಳಿಗೊಮ್ಮೆ ಟ್ಯಾಂಕ್ನ್ನು ಸ್ವಚ್ಛಗೊಳಿಸಲಾಗುತ್ತಿದ್ದು, ಆದಷ್ಟು ಬೇಗ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಜೀರಾಳ ಗ್ರಾಮ ಪಂಚಾಯತ್ನ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ 28ರವರೆಗೆ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) 2025 ನಡೆಯಲಿದೆ. #KITE

ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. #Gruhalakshmi

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಸಮರ್ಪಕವಾಗಿ ಅಕ್ಕಿ ಪೂರೈಕೆಯಾಗದಿದ್ದು, ಪ್ರಾಥಮಿಕ ಶಾಲಾ ಮಕ್ಕಳ ಅಕ್ಕಿಯನ್ನು ಬಳಸುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಸದರಿ ಶಾಲಾ ಮಕ್ಕಳಿಗೆ ಈ ಹಿಂದೆ ಇಲಾಖೆಯಿಂದ ಜುಲೈ ತಿಂಗಳವರೆಗಿನ ಅಕ್ಕಿಯನ್ನು ಒದಗಿಸಲಾಗಿದ್ದು, ಆ ಅಕ್ಕಿಯನ್ನು ಅಕ್ಟೋಬರ್ ತಿಂಗಳವರೆಗೆ ಬಳಸಲಾಗಿರುತ್ತದೆ. ನವೆಂಬರ್ನಿಂದ ಅಕ್ಕಿ ಪೂರೈಕೆಯು ವಿಳಂಬವಾದ ಕಾರಣ ಪ್ರಾಥಮಿಕ ವಿಭಾಗದಿಂದ ಉಳಿಕೆಯಾದ ಅಕ್ಕಿಯನ್ನು ತೆಗೆದುಕೊಳ್ಳಲಾಗಿರುತ್ತದೆ. ಇದನ್ನು ಗಮನಿಸಿ ಪ್ರೌಢಶಾಲಾ ಮಕ್ಕಳಿಗೆ ಅಕ್ಕಿಯನ್ನು ಖರೀದಿಸಲು ಅವಕಾಶ ನೀಡಲಾಗಿದ್ದು, ಪ್ರಾಥಮಿಕ ವಿಭಾಗದಿಂದ ಬಳಕೆಯಾದ ಅಕ್ಕಿಯನ್ನು ಹಿಂದಿರುಗಿಸಲಾಗುವುದು. ಉಳಿದಂತೆ ಪಡಿತರ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗಿರುವುದಿಲ್ಲ ಎಂದು ವಿಜಯನಗರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
