ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
March 1, 2025 at 12:54 PM
ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯವಿವಾಹ ನಿರ್ಮೂಲನೆ ಸಾಧ್ಯ : ಹಿರಿಯ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಅಭಿಮತ ▪️ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯವಿವಾಹದ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷರಾದ ಕೆ. ಸೋಮಶೇಖರ್ ಅವರು ತಿಳಿಸಿದರು. ▪️ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ನಗರಸಭೆ ಹಾಗೂ ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಚಾಮರಾಜನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಪರಿವರ್ತಿಸಲು ‘ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ’ಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಾಮಥ್ರ್ಯಾಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ▪️ಸತಿಪದ್ದತಿ ಕಾಲದಿಂದಲೂ ಬಾಲ್ಯವಿವಾಹ ಸಾಮಾಜಕ್ಕೆ ಕಳಂಕವಾಗಿ ಪರಿಣಮಿಸಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಸರ್ಕಾರದಿಂದ ಹಲವು ಕಾಯ್ದೆಗಳನ್ನು ಜಾರಿಗೊಳಿಸಿದ್ದರೂ ಅಲ್ಲಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಬಾಲ್ಯವಿವಾಹದ ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆದು ಜ್ಞಾನ ವೃದ್ಧಿಸಿಕೊಳ್ಳಬೇಕು. ಮಕ್ಕಳಿಗೆ ಸುರಕ್ಷತೆ ಒದಗಿಸಬೇಕಿದೆ. ಪೋಷಕರು ಚಿಂತನಾ ಸಾಮಥ್ರ್ಯ ಬೆಳೆಸಿಕೊಂಡು ನೆರೆಹೊರೆಯವರಿಗೂ ತಿಳಿಹೇಳಬೇಕು. ಸುಶಿಕ್ಷಿತ ಸಮಾಜ, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶ ನಿರ್ಮಾಣವಾಗಬೇಕು. ಆಗಮಾತ್ರ ಬಾಲ್ಯವಿವಾಹ ಸಂಪೂರ್ಣ ನಿಯಂತ್ರಣಕ್ಕೆ ಬರಲಿದೆ ಎಂದು ಹಿರಿಯ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಅವರು ಹೇಳಿದರು. ▪️ಆರಂಭದಲ್ಲಿ ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ಸಂವಿಧಾನದ ಪೀಠಿಕೆ ಬೋಧಿಸಿದರು. ▪️ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರು ಬಾಲ್ಯವಿವಾಹ ನಿಷೇಧದ ಪ್ರತಿಜ್ಞಾವಿಧಿ ಬೋಧಿಸಿ ಬಳಿಕ ಮಾತನಾಡಿ ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದೆ. ಹೆಣ್ಣಿಗೆ 18, ಗಂಡಿಗೆ 21 ವರ್ಷ ತುಂಬಿದ ಬಳಿಕವೇ ಮದುವೆ ಬಗ್ಗೆ ಪೋಷಕರು ಚಿಂತಿಸಬೇಕು. ಮುಖ್ಯವಾಗಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಮೂಲಕ ಬಾಲ್ಯವಿವಾಹ ಸಂಪೂರ್ಣ ನಿರ್ಮೂಲನೆಗೆ ಮುಂದಾಗಬೇಕು ಎಂದರು. ▪️ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ದೇಶ ಸ್ವಾತಂತ್ರ್ಯಗೊಂಡು 75 ವರ್ಷ ಆಗಿದ್ದರೂ ಇನ್ನೂ ನಾವು ಬಾಲ್ಯವಿವಾಹದ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ. ಬಾಲ್ಯವಿವಾಹ ನಿರ್ಮೂಲನೆಗೆ ಹೆಚ್ಚಿನ ಅರಿವು ಮೂಡಿಸುವ ಚಟುವಟಿಕೆಗಳು ನಡೆಯುತ್ತಿದ್ದರೂ ಆಗಾಗ್ಗೆ ಜರುಗುತ್ತಿವೆ. ಪ್ರಕರಣಗಳು ಹೆಚ್ಚಿದಷ್ಟು ಪರಿಣಾಮಕಾರಿ ಯೋಜನೆ ರೂಪಿಸಲು ಸಹಾಯಕವಾಗಲಿದೆ. ಜಿಲ್ಲೆ ಜನಪದ ಕಲೆ, ಸಾಹಿತ್ಯದಲ್ಲಿ ಮುಂದಿದೆ. ಶೇ. 50ರಷ್ಟು ಅರಣ್ಯ ಪ್ರದೇಶವಿರುವ ಸಂಪದ್ಭರಿತ ಹಸಿರಿನ ಸುಂದರ ಜಿಲ್ಲೆ ನಮ್ಮದು. ಜಿಲ್ಲೆಯಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳು ಇದ್ದಾರೆ. ಆದರೂ ಸಹ ಕೆಲ ಸಾಮಾಜಿಕ ಕಟ್ಟುಪಾಡು, ಒತ್ತಡಗಳಿಗೆ ಒಳಗಾಗಿ ನಮ್ಮ ಜವಾಬ್ದಾರಿಯನ್ನು ಮರೆಯಬಾರದು. ಈ ವ್ಯವಸ್ಥೆ ಬದಲಾಗಬೇಕು ಎಂದರು. ▪️ಜಿಲ್ಲೆಯ 130 ಗ್ರಾಮಪಂಚಾಯಿತಿಗಳಲ್ಲಿ ಸಾಕಷ್ಟು ಮಹಿಳಾ ಅಧ್ಯಕ್ಷರು, ಸದಸ್ಯರಿದ್ದಾರೆ. ಎಲ್ಲಾ ಗ್ರಾಮಗಳು, ವಾರ್ಡ್‍ಗಳಲ್ಲಿ ಬಾಲ್ಯವಿವಾಹ ನಿರ್ಮೂಲನೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ಮೂಲಕ ಮೊದಲು ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹದ ನಿಯಂತ್ರಣ ಪ್ರಕ್ರಿಯೆ ನವೆಂಬರ್ 14ರ ಮಕ್ಕಳ ದಿನಾಚರಣೆ ವೇಳೆಗೆ ಸಂಪೂರ್ಣವಾಗಬೇಕು. ಹೆಚ್ಚಿನ ಪ್ರಗತಿ ಸಾಧಿಸುವ ಗ್ರಾಮಪಂಚಾಯಿತಿಗೆ ಪ್ರಶಸ್ತಿ ನೀಡುವ ಯೋಜನೆ ಇದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿ ಜನಪ್ರತಿನಿಧಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರ ಸಹಕಾರ ಪಡೆದು ಸಂಪೂರ್ಣ ನಿಯಂತ್ರಣಕ್ಕೆ ದೃಢಸಂಕಲ್ಪ ಮಾಡೋಣ. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೋಡೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ▪️ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಕಾರ್ಯಕ್ರಮದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ▪️ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಂಪನ್ಮೂಲ ವ್ಯಕ್ತಿಗಳಾದ ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದ ಸದಸ್ಯರು ಹಾಗೂ ಅಭಿವೃದ್ಧಿ ಶಿಕ್ಷಣ ತಜ್ಞರಾದ ಪ್ರೊ. ವಿ.ಪಿ. ನಿರಂಜನಾರಾಧ್ಯ, ಬಚಪನ್ ಬಚಾವೋ ಆಂದೋಲನದ ರಾಜ್ಯ ಸಂಯೋಜಕರಾದ ಬಿನು ವರ್ಗಿಸ್, ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ನಿರ್ದೇಶಕರಾದ ಸರಸ್ವತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಲತಾ, ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು. ▪️ವೇದಿಕೆ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ‘ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ’ಗಳಿಗೆ ಬಾಲ್ಯವಿವಾಹ ತಡೆಗಟ್ಟುವ ಕುರಿತ ಸಾಮಥ್ರ್ಯಾಭಿವೃದ್ಧಿ ವಿಚಾರ ಗೋಷ್ಠಿಗಳು ನಡೆದವು. #chamarajanagarupdates #chamarajanagar #childprotection #childmarriage

Comments